ಶಿವಮೊಗ್ಗ: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ. 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಆಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಸಂಚಾಲಕ ಎಂ.ಬಿ. ನಾಗಣ್ಣ ಗೌಡ ಹೇಳಿದ್ದಾರೆ. ಕಳೆದ ಮೇ 22 ರಂದು ರಾಜ್ಯ ಕಾರ್ಮಿಕ ಇಲಾಖೆ ಪರಿಷ್ಕೃತ ಕನಿಷ್ಠ ವೇತನದ ಆದೇಶ ಹೊರಡಿಸಿತ್ತು. ಆದರೆ ಇಲ್ಲಿಯವರೆಗೂ ಅದನ್ನು ಜಾರಿಗೆ ತರಲಾಗಿಲ್ಲ. ಹತ್ತು ವರ್ಷಗಳಿಂದ ವೇತನ ಹೆಚ್ಚಳವಾಗದೆ ನೌಕರರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಆ. 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಆಗ್ರಹ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 1.5 ಲಕ್ಷ ಹೊರಗುತ್ತಿಗೆ ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ 17,400 ವೇತನ ಮಾತ್ರ ಬರುತ್ತಿದೆ. ಪರಿಷ್ಕೃತ ವೇತನ ಜಾರಿಗೆ ಬಂದರೆ 28,500 ರೂ. ಆಗುತ್ತದೆ. ಆದ್ದರಿಂದ ಸರ್ಕಾರ ಮೀನಾಮೇಷ ಎಣಿಸದೆ ತಕ್ಷಣವೇ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

