ತೀರ್ಥಹಳ್ಳಿ: ಕಳೆದ 37 ವರ್ಷಗಳಿಂದ ಪತ್ತೆಯಾಗದೆ ತಲೆಮರೆಸಿಕೊಂಡಿದ್ದ ಡಕಾಯಿತಿ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು ತಾಲೂಕಿನ ಪೆರ್ರ ಬಜ್ಪೆ ಮೂಲದ ಅಬ್ದುಲ್ ಖಾದರ್ @ ಮೊಣು (57 ವರ್ಷ) ಬಂಧಿತ ಆರೋಪಿ.
ಇನ್ನು ಪ್ರಕರಣದ ಹಿನ್ನೆಲೆ ನೋಡುವುದಾದರೆ: 1989ರಲ್ಲಿ ತೀರ್ಥಹಳ್ಳಿ ತಾಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದಂದಿನಿಂದ ಆರೋಪಿ ಅಬ್ದುಲ್ ಖಾದರ್ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಕೇರಳದಲ್ಲಿ ಬಂಧನ: ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾಧ ನಿಖಿಲ್, ಬಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರ್ಯಪ್ಪ ಎ. ಜಿ. ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ ಕಲಗುಚ್ಚಿ ರವರುಗಳ ಮಾರ್ಗದರ್ಶನದಲ್ಲಿ ಹಾಗೂ ಮಾಳೂರು ವೃತ್ತ ಸಿಪಿಐ. ರಾಜಶೇಖರ್ ಮಾಳೂರು ಠಾಣೆಯ ಪಿಎಸ್ಐ. ರವರ ನಿರ್ದೇಶನದಲ್ಲಿ ಮಾಳೂರು ಠಾಣೆಯ ಪೋಲಿಸರು ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು.
ಆರೋಪಿಯು ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಪಾಡಿ ಪುರ ಸಂಗೋಡಿಯಲ್ಲಿ ವಾಸವಾಗಿರುವ ಬಗ್ಗೆ ನಿಖರ ಮಾಹಿತಿ ಕಲೆಹಾಕಿದ ಪೊಲೀಸರು, ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾನ್ಯ ಶಿವಮೊಗ್ಗ ಸತ್ರ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

