Home ರಾಜಕೀಯ ಗೃಹ ಇಲಾಖೆ ‘ಫೇಸ್ ಬುಕ್ ವಾಟ್ಸಾಪ್’ ಗಷ್ಟೇ ಸೀಮಿತ ವಾಗಿದೆ : ಸುನಿಲ್ ಕುಮಾರ್

ಗೃಹ ಇಲಾಖೆ ‘ಫೇಸ್ ಬುಕ್ ವಾಟ್ಸಾಪ್’ ಗಷ್ಟೇ ಸೀಮಿತ ವಾಗಿದೆ : ಸುನಿಲ್ ಕುಮಾರ್

by Mahesh malenaadu

ಶಿವಮೊಗ್ರಾಗ:  ರಾಜ್ಯದಲ್ಲಿ ಗೃಹ ಇಲಾಖೆ ಜೀವಂತವಾಗಿದೆಯೋ ಇಲ್ಲವೋ ಎಂಬ ದೊಡ್ಡ ಅನುಮಾನ ವ್ಯಕ್ತವಾಗುತ್ತಿದೆ. ಪ್ರಸ್ತುತ ಗೃಹ ಇಲಾಖೆಯು ಕೇವಲ ಫೇಸ್‍ಬುಕ್ ಮತ್ತು ವಾಟ್ಸಾಪ್‍ಗಳನ್ನು ನಿಯಂತ್ರಿಸುವುದಕ್ಕೆ ಹಾಗೂ ಬಿಜೆಪಿ ನಾಯಕರ ಭಾಷಣಗಳನ್ನು ಹುಡುಕಿ ನೋಟಿಸ್ ನೀಡುವುದಕ್ಕಷ್ಟೇ ಸೀಮಿತವಾಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಡ್ರಗ್ಸ್ ದಂಧೆ, ಸಾಲು ಸಾಲು ಕೊಲೆ ಮತ್ತು ಸುಲಿಗೆಗಳ ಬಗ್ಗೆ ಗೃಹ ಇಲಾಖೆಗೆ ಯಾವುದೇ ತಲೆಬಿಸಿಯಿಲ್ಲ. ಬದಲಿಗೆ, ಕೇವಲ ವಿಪಕ್ಷ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾತನಾಡುತ್ತಾರೆ, ಭಾಷಣಗಳಲ್ಲಿ ಏನು ಹೇಳುತ್ತಾರೆ ಎಂಬುದನ್ನು ಹುಡುಕುವುದನ್ನೇ ಇಲಾಖೆ ತನ್ನ ಮುಖ್ಯ ಕೆಲಸವನ್ನಾಗಿಸಿಕೊಂಡಿದೆ. ಗೃಹ ಇಲಾಖೆ ಈ ರೀತಿ ಒಂದು ನಿರ್ಧಿಷ್ಟ ಪಕ್ಷವನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದಿದ್ದಾರೆ.

ಇತ್ತೀಚೆಗೆ ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಯಶ್‍ಪಾಲ್ ಸುವರ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ, ಬಿಜೆಪಿ ನಾಯಕರು ಹಿಂದೆ ಗೋಲಿಬಾರ್ ಹಾಗೂ ಲಾಠಿ ಚಾರ್ಜ್‍ಗಳಿಗೆ ಹೆದರಿದವರಲ್ಲ. ಇನ್ನು ಕಾಂಗ್ರೆಸ್ ಸರ್ಕಾರದ ಈ ಬೆದರಿಕೆ ನೋಟಿಸ್ ಹಾಗೂ ಎಫ್‌ ಐಆರ್ ಗೆ ಹೆದರುವ ಪ್ರಶ್ನೆಯೇ ಇಲ್ಲ. ನೋಟಿಸ್ ನೀಡುವ ಮೂಲಕ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಸರ್ಕಾರವನ್ನು ವಿರೋಧಿಸುವ ಬಿಜೆಪಿ ನಾಯಕರು, ಶಾಸಕರು ಹಾಗೂ ಹಿಂದುತ್ವವಾದಿಗಳನ್ನು ಸಾಲಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಬಿಡದಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ ರೈತರ ಮೇಲೆಯೇ ಕೊಲೆಯತ್ನ ಕೇಸ್ ಹಾಕಲಾಗಿದೆ. ಮತ್ತೊಂದೆಡೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಇದೇ ವೇಳೆ ರಾಜ್ಯದ ಬರ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡಬೇಕಾದ ಕೆಲಸವನ್ನು ಇಂದು ವಿರೋಧ ಪಕ್ಷವಾದ ಬಿಜೆಪಿ ಮಾಡುತ್ತಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಸರ್ಕಾರದಲ್ಲಿ ಸಚಿವರುಗಳು ಎಲ್ಲಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ರೈತರಿಗೆ ಅನಾಥ ಪ್ರಜ್ಞೆ ಕಾಡುತ್ತಿದ್ದು, ಅವರಿಗೆ ಧೈರ್ಯ ತುಂಬಲು ಹಾಗೂ ಅವರು ವಿಚಲಿತರಾಗದಂತೆ ಬೆಂಬಲವಾಗಿ ನಿಲ್ಲಲು ಬಿಜೆಪಿ 6 ತಂಡಗಳ ಮೂಲಕ ಜಂಟಿ ಬರ ಅಧ್ಯಯನ ಪ್ರವಾಸ’ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಜನತೆ ಇನ್ನು ಒಂದುವರೆ ವರ್ಷಗಳ ಕಾಲ ಈ ದುರಾಡಳಿತವನ್ನು ಸಹಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಿದೆ. ಆದರೆ ಕಾಂಗ್ರೆಸ್ ಸರ್ಕಾರದ ಈ ತಾರತಮ್ಯ, ದ್ವೇಷದ ರಾಜಕಾರಣ ಮತ್ತು ಬೆದರಿಕೆ ತಂತ್ರಗಳಿಗೆ ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

Spread the love

You may also like

Leave a Comment