53
ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಶಿಕಾರಿಪುರ ತಾಲೂಕಿನ ಜೀವನಾಡಿಯಾಗಿರುವ ಅಂಜನಾಪುರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅವರು ಜಲಾಶಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.
ಶಿಕಾರಿಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾಗಿರುವ ಈ ಡ್ಯಾಂ ತುಂಬಿ ಹರಿಯುತ್ತಿರುವುದರಿಂದ ಇಡೀ ತಾಲೂಕಿಗೆ ಹೊಸ ಜೀವಕಳೆ ಬಂದಂತಾಗಿದೆ. ಈ ವೇಳೆ ಮಾತನಾಡಿದ ಬಿ.ವೈ. ವಿಜಯೇಂದ್ರ, ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ತೀವ್ರ ಹರ್ಷ ವ್ಯಕ್ತಪಡಿಸಿದರು. ಉತ್ತಮ ಮಳೆಯಿಂದಾಗಿ ನಾಡಿನ ಜಲಮೂಲಗಳು ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲಿ ಎಂದು ಅವರು ಆಶಿಸಿದರು.

