ಶಿವಮೊಗ್ಗ : ಮುಂಬರುವ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರ ನೇತೃತ್ವದಲ್ಲಿ ನಗರದಾದ್ಯಂತ ಪೊಲೀಸರು ಬೃಹತ್ ‘ರೂಟ್ ಮಾರ್ಚ್’ (ಪಥಸಂಚಲನ) ನಡೆಸಿದರು.
ನಗರದ ಪ್ರಮುಖ ರಸ್ತೆಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿದ ಪೊಲೀಸ್ ಪಡೆಗಳು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ. ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಸಾರ್ವಜನಿಕರು ಆತಂಕವಿಲ್ಲದೆ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಅಥವಾ ಸಮಾಜದ ಸ್ವಾಸ್ಥ್ಯ ಕದಡುವ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು. ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ” ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ರವಾನಿಸಿದೆ. ಹಬ್ಬದ ದಿನಗಳಂದು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

