ಶಿವಮೊಗ್ಗ : ಕೌಟುಂಬಿಕ ಕಲಹದಿಂದ ಮನನೊಂದು 30ಕ್ಕೂ ಹೆಚ್ಚು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರನ್ನು ಶಿವಮೊಗ್ಗ ಜಿಲ್ಲಾ ERSS 112 ಸಿಬ್ಬಂದಿ ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರು ಕೌಟುಂಬಿಕ ಕಾರಣಗಳಿಂದಾಗಿ 30ಕ್ಕೂ ಹೆಚ್ಚು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಕುರಿತು ERSS 112 ತುರ್ತು ಸಂಖ್ಯೆಗೆ ಕರೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ERV ವಾಹನದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವೀರೇಶಯ್ಯ B M ಹಾಗೂ ಸುರೇಶ್ ನಾಯ್ಕ ರವರು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿದರು. ಮಹಿಳೆಯ ಪರಿಸ್ಥಿತಿ ಗಂಭೀರವಾಗಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದ್ದಿದ್ದನ್ನು ಮನಗಂಡ ಸಿಬ್ಬಂದಿ, ತಡಮಾಡದೇ ತಮ್ಮ ERSS ವಾಹನದಲ್ಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಸಿಬ್ಬಂದಿಯ ಈ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯಿಂದಾಗಿ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆತು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂಕಷ್ಟದ ಸಮಯದಲ್ಲಿ ತಕ್ಷಣವೇ ಸ್ಪಂದಿಸಿ, ಮಹಿಳೆಯ ಪ್ರಾಣ ರಕ್ಷಿಸಿದ ERSS ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಸಮಯೋಚಿತ ಕರ್ತವ್ಯ ನಿಷ್ಠೆಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮುಕ್ತಕಂಠದಿಂದ ಶ್ಲಾಘಿಸಿದ್ದು, ಅಭಿನಂದನೆ ಸಲ್ಲಿಸಿದೆ.

