ಶಿವಮೊಗ್ಗ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ ಬಳಿಯಿದ್ದ ಬಂಗಾರದ ಸರವನ್ನು ಮೋಸದಿಂದ ಪಡೆದುಕೊಂಡಿದ್ದ ಪ್ರಕರಣದಲ್ಲಿ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.62 ಲಕ್ಷ ದಂಡ ವಿಧಿಸಿದೆ.
2022ರಲ್ಲಿ ಶಿವಮೊಗ್ಗ ಟೌನ್ನ 20 ವರ್ಷದ ವ್ಯಕ್ತಿಯೊಬ್ಬನು 17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಆಕೆಯ ಬಳಿ ಇದ್ದ ಬಂಗಾರದ ಸರವನ್ನು ಮೋಸದಿಂದ ಪಡೆದುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 363, 366, 420 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ಕುಂಸಿ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಾ ನಾಯ್ಕ್ ಅವರು ನಡೆಸಿ, ತನಿಖೆ ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ತೀರ್ಪು ಪ್ರಕಟಿಸಿದ್ದಾರೆ. ಆರೋಪಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,62,000 ದಂಡ ವಿಧಿಸಲಾಗಿದೆ. ಅಲ್ಲದೆ, ಪ್ರಕರಣದಲ್ಲಿ ನೊಂದ ಬಾಲಕಿಗೆ 62,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

